ಗಾಳಿಯಲ್ಲಿ ತೇಲಿ ಬಂದ ಹೂವ ಕಂಪಿಗೆ ಮಾರು ಹೋದ ದ್ರೌಪತಿ ಭೀಮಸೇನನನ್ನು ಕಾಡಿಸಿ ಪೀಡಿಸಿ ಸೌಗಂಧಿಕಾ ಪುಷ್ಪವನ್ನು ತರಿಸಿದ್ದು .. , ಯುದ್ಧದಲ್ಲಿ ಸಹಾಯಕ್ಕಾಗಿ ಕೃಷ್ಣನೊಡನೆ ಹೋದ ಸತಿ ಸತ್ಯಭಾಮೆ ದೇವೇಂದ್ರನ ಉದ್ಯಾನವನದಿಂದ ಪಾರಿಜಾತವನ್ನು ಭೂಮಿಗೆ ತಂದದ್ದು ಇದೆಲ್ಲ ಸ್ತ್ರೀಯರ ಪ್ರಕೃತಿ ಪ್ರೇಮದ , ಗಿಡಗಳ ಬಗೆಗಿನ ಪ್ರೀತಿಯ ಪರಾಕಾಷ್ಟತೆಯನ್ನು ಸೂಚಿಸುತ್ತದೆ ಎಂದರೆ ಹೆಣ್ಣು ಮಕ್ಕಳ ಗಂಡಂದಿರಾರು ಒಪ್ಪಿ ತಲೆಯಾಡಿಸುವುದಿಲ್ಲ ಎಂದು ನನಗೆ ತಿಳಿದಿದೆ ಬಿಡಿ. ಯಾಕೆಂದರೆ ನಾನೂ ಈ ಸಮಸ್ಯೆಯನ್ನು ಅನುಭವಿಸಿದವಳೇ ಇದ್ದೇನೆ.

ಇಂತಿಪ್ಪ ಕಾಲದಲ್ಲೊಮ್ಮೆ ನನ್ನ ತವರೂರಿನಲ್ಲಿ ಊರಿಗೆ ಊರೇ ಸಂಭ್ರಮಿಸುವ ಜಾತ್ರೆ ಸಮೀಪಿಸಿತು. ಮಗಳಿಲ್ಲದ ಜಾತ್ರೆ ತೌರಿನವರಿಗೆ ಹೇಗೆ ರುಚಿಸೀತು ಎಂಬ ಸತ್ಯವನ್ನರಿತು ನಾನು ಒಂದೆರಡು ದಿನ ಮುಂಚಿತವಾಗಿಯೇ ತಲುಪಿದ್ದೆ. ನನ್ನ ಓರಗೆಯ ಗೆಳತಿಯರನೇಕರು ಇದನ್ನೇ ಅನುಸರಿಸುತ್ತಿದ್ದ ಕಾರಣ ನಮ್ಮ ಮಾತು ಗೌಜು ಗದ್ದಲಗಳಲ್ಲಿ ಜಾತ್ರೆ ಯಾವಾಗ ಕಳೆತೆಂದೇ ತಿಳಿಯುತ್ತಿರಲಿಲ್ಲ.
ಈ ಸಲ ನನ್ನಿಂದ ಒಂದು ದಿನ ಮುಂಚಿತವಾಗಿಯೇ ಬಂದು ಅಪ್ಪನ ಮನೆಯ ಸೇವೆಯನ್ನು ಸ್ವೀಕರಿಸುತ್ತಿದ್ದ ಗೆಳತಿ, ನನ್ನ ಮುಖ ಕಂಡೊಡನೇ ಅವಸರದಿಂದ 'ಹೇ ಈ ಸಲ ಜಾತ್ರೆಗೆ ಹೂವಿನ ಬೀಜಗಳ ಅಂಗಡಿ ಬಂದಿದೆ ಕಣೇ.. ನಾನಂತೂ ನಿನ್ನೆಯೇ ಕೆಲವು ಜಾತಿಯ ಬೀಜಗಳನ್ನು ತೆಗೆದಿಟ್ಟುಕೊಂಡೂ ಆಯ್ತು ಎಂದು ನನ್ನ ಹೊಟ್ಟೆ ಉರಿಸಿದಳು. ಹತ್ತಿರವೇ ಇದ್ದ ಅವಳ ಮನೆಗೆ ನನ್ನನ್ನೆಳೆದೊಯ್ದು ಬಣ್ಣ ಬಣ್ಣದ ಹೂವಿನ ಚಿತ್ರಗಳುಳ್ಳ ಕಾಗದದ ಪುಟ್ಟ ಲಕೋಟೆಗಳನ್ನು ತೋರಿಸಿದಳು. ಒಳಗೇನಿದೆ ಎಂದು ನೋಡುವಂತಿರಲಿಲ್ಲ. ನನ್ನ ಕಣ್ಣಲ್ಲಿ ಹೊಳೆದ ಆಸೆಯನ್ನು ಅರ್ಥೈಸಿಕೊಂಡು, 'ನಾಳೆಯೂ ಇರುತ್ತೆ, ನಾನೇ ಕರ್ಕೊಂಡು ಹೋಗ್ತೀನಿ' ಎಂದು ಬೇಗನೇ ಅವುಗಳನ್ನು ಎತ್ತಿ ಒಳಗಿಟ್ಟಳು.
ರಾತ್ರಿಯಿಡೀ ಕನಸಿನಲ್ಲೆಲ್ಲ ನಾನು ಕಾಗದದ ಲಕೋಟೆಯ ಮೇಲೆ ಕಂಡ ಹೂವುಗಳ ಉದ್ಯಾನವನದಲ್ಲಿ ವಿಹರಿಸಿದ್ದೇ ವಿಹರಿಸಿದ್ದು. ಬೆಳಗಾಗುತ್ತಿದ್ದಂತೆ ಸೂರ್ಯ ಎಲ್ಲರಿಗಿಂತ ಮೊದಲು ನನ್ನನ್ನೇ ಏಳಿಸಿದ್ದ. ಅಮ್ಮ ಇನ್ನೂ ತಿಂಡಿಯ ತಯಾರಿಯಲ್ಲಿರುವಾಗಲೇ ಪಕ್ಕದ ಮನೆಯಲ್ಲಿದ್ದ ಗೆಳತಿಯನ್ನು ಕರೆದುಕೊಂಡು ಹೂವಿನ ಬೀಜದ ಅಂಗಡಿಗೆ ನಡೆದು ಕಣ್ಣಿಗೆ ಅಂದವೆಂದು ಕಂಡ ಎಲ್ಲಾ ಹೂಗಳ ಬೀಜಗಳನ್ನು ಖರೀದಿಸಿದೆ.
ಬಣ್ಣ ಬಣ್ಣದ ಹೂವಿನ ಚಿತ್ರಗಳು. ನೋಡಿದರೆ ಕಣ್ಣು ತಂಪೆನಿಸುತ್ತಿತ್ತು. ಸಾಮಾನ್ಯವಾಗಿ ಜಾತ್ರೆಯ ನಂತರವೂ ನನ್ನ ತೌರಿನ ವಾಸ್ತವ್ಯವನ್ನು ಒಂದೆರಡು ದಿನಕ್ಕೆ ವಿಸ್ತರಿಸುತ್ತಿದ್ದ ನಾನು, ಮೇಲಿಂದ ಮೇಲೆ ಬರ ತೊಡಗುವ ಇವರ ಫೋನ್ ಕರೆಗಳ ಕರಕರೆ ಸುರುವಾವಾದ ನಂತರವೇ ಹೊರಡುತ್ತಿದ್ದೆ. ಆದರೆ ನಾನು ಈ ಸಲ ಜಾತ್ರೆ ಮುಗಿಯುತ್ತಿದ್ದಂತೇ, ಗಂಟು ಮೂಟೆ ಕಟ್ಟಿ ಹೊರಟೇ ಬಿಟ್ಟಿದ್ದೆ. ಇವರ ಅಚ್ಚರಿಯ ನೋಟಕ್ಕೆ ಉತ್ತರಿಸುವ ಗೋಜಿಗೆ ಹೋಗದೇ, ತಂದ ಲಗೇಜನ್ನು ಬಿಚ್ಚುವ ಮುಂಚೆಯೇ ಚಟ್ಟಿಗಳಿಗೆ ಮಣ್ಣು ತುಂಬುವ ಕಾರ್ಯದಲ್ಲಿ ನಿರತಳಾದೆ.

ನಾನು ಒಂದೊಂದೇ ಲಕೋಟೆಗಳನ್ನು ಜಾಗ್ರತೆಯಿಂದ ಹರಿದು ,ಒಳಗಿನ ಬೀಜಗಳನ್ನು ನೋಡತೊಡಗಿದೆ. ಅಚ್ಚರಿಯೆಂಬಂತೆ ಎಲ್ಲಾ ಲಕೋಟೆಗಳಲ್ಲೂ ಬೀಜಗಳು ಕಪ್ಪಾಗಿದ್ದು ಒಂದೇ ರೀತಿಯ ಆಕಾರ ಗಾತ್ರಗಳನ್ನು ಹೊಂದಿದ್ದವು. ಒಂದೇ ತರದ ಬೀಜಗಳಿಂದ ಇಷ್ಟೊಂದು ಬಗೆಯ ಹೂವುಗಳೇ ! ಎಂದು ಉದ್ಗರಿಸುತ್ತಾ ಇವರೆಡೆಗೆ ತಿರುಗಿ , " ನೋಡ್ತಾ ಇರಿ ಇನ್ನು ಕೆಲವೇ ದಿನಗಳಲ್ಲಿ ನಮ್ಮನೆಗೆ ಸುಂದರ ಹೂದೋಟ ಹೊಂದಿದ ಮನೆ ಅಂತ ಅವಾರ್ಡ್ ಬರುತ್ತೆ. ಮೊನ್ನೆ ಆ ಪಕ್ಕದ ಮನೆ ಯಶೋದಮ್ಮ ಅಂತೂ ಒಂದು ಪುಟ್ಟ ಗಿಡ ಕೊಡೋಕ್ಕೂ ಹೇಗಾಡ್ಬಿಟ್ರು ಅಂತೀರಿ! ಇನ್ನು ನನ್ನ ಗಾರ್ಡನ್ ನೋಡಿ ತಾವೇ ಬರ್ತಾರೆ ನನ್ಹತ್ರ ಗಿಡ ಕೇಳ್ಕೊಂಡು" ಎಂದು ಹೆಮ್ಮೆಯಿಂದ ನುಡಿದು ಕನಸಿನ ಲೋಕಕ್ಕೂ ಹೋಗಿ ಬಂದೆ. ಇವರೋ ಬಾಯೊಳಗೆ ತುಂಬಿಕೊಂಡ ರವೆ ಉಂಡೆಯಿಂದಾಗಿ ಹುಂ.. ಉಹುಂ.. ಮ್ ಮ್.. ಎಂದೇನೋ ಸ್ವರ ಹೊರಡಿಸಿದರು.

ಇವರು ನನ್ನನ್ನು ಮತ್ತು ನನ್ನ ಉದ್ಯಾನವನದ ಅಂದ ಕಂಡು ನಗುತ್ತಿದ್ದರೆ , ನಾನು ಛಲ ಬಿಡದೆ ಬಣ್ಣದ ಲಕೋಟೆಗಳ ಮೇಲೆ ಸರಬರಾಜುದಾರರ ವಿಳಾಸವೇನಾದರೂ ಇದೆಯೋ ಎಂದು ಹುಡುಕುತ್ತಿದ್ದೆ.ಕೋಲು ಕೊಟ್ಟು ಹೊಡೆಸಿಕೊಳ್ಳಲು ಅವರೇನು ನಿನ್ನಂತ ಅತಿ ಬುದ್ಧಿವಂತರೇ ..ಎಂದು ನನ್ನ ವೇದನೆಯ ಅಗ್ನಿಗೆ ಇವರು ಇನ್ನೊಂದಿಷ್ಟು ತುಪ್ಪ ಸುರಿದರು .ಕೋಪ ಬಂದರೂ ಮಾತನಾಡದೆ ಲಕೋಟೆ ಗಳನ್ನೆಲ್ಲ ಬಚ್ಚಲ ಒಲೆಗೆ ಎಸೆದೆ .
ಈಗ ಯಥಾ ಪ್ರಕಾರ ನನ್ನ ಮೊದಲಿನ ಹವ್ಯಾಸದಂತೆ ಅವರಿವರ ಮನೆಯ ಕಾಂಪೋಂಡಿನ ಕಡೆಗೆ ಕಣ್ಣು ಹಾಯಿಸುವುದನ್ನು ಪ್ರಾರಂಭಿಸಿದ್ದೇನೆ.